ದಾವಣಗೆರೆ: ಕಳೆದ 15 ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಿತ್ತಿದ್ದ ಮೆಕ್ಕೆಜೋಳ ಸೇರಿದಂತೆ ಬಹುತೇಕ ಬೆಳೆಗಳಿಗೆ ಹಾನಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಬೆಳೆಹಾನಿ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನ ಹರಿಸಲು ಮಾಜಿ ಸಚಿವ ರೇಣುಕಾಚಾರ್ಯ ಅವರು ಆಗ್ರಹಿಸಿದರು.
ಇಂದಿಗೂ ಬರ ಪರಿಹಾರವನ್ನೇ ಈ ಸರ್ಕಾರ ನೀಡಿಲ್ಲ ಎಂದು ಆರೋಪಿಸಿ, ರೇಣುಕಾಚಾರ್ಯ ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. “ಈ ಹಿಂದಿನಿಂದಲೂ ಕೇಂದ್ರದತ್ತ ಬೊಟ್ಟು ಮಾಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಲೇ ಬಂದಿದ್ದಾರೆ. ಈಗಲೂ ಅದನ್ನೇ ಮಾಡದೇ, ರೈತರಿಗೆ ಬರ ಪರಿಹಾರ ನೀಡಲಿ,” ಎಂದು ಅವರು ಹೇಳಿದರು.
ಬಿತ್ತಿದ ಬೆಳೆಗಳಿಗೆ ಹಾನಿಯಾಗಿರುವುದರಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಸೂಕ್ತ ಪರಿಹಾರವನ್ನು ಘೋಷಿಸಬೇಕು ಮತ್ತು ರೈತರಿಗೆ ನೆರವಾಗಬೇಕು. ರೈತರ ಸಮಸ್ಯೆಗಳನ್ನು ಕಡೆಗಣಿಸಿದರೆ, ಭವಿಷ್ಯದಲ್ಲಿ ಉಂಟಾಗುವ ಪರಿಣಾಮಗಳಿಗೆ ಸರ್ಕಾರವೇ ಜವಾಬ್ದಾರಿಯಾಗಿರುತ್ತದೆ ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದರು.
ಮಳೆ ಮತ್ತು ಬೆಳೆ ಹಾನಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
