
ಚಿಕ್ಕಮಗಳೂರು ಜಿಲ್ಲೆ:
ಕಡೂರು ಸಮೀಪದ ಬೀರೂರು ರೈಲ್ವೆ ನಿಲ್ದಾಣದಲ್ಲಿ ಅಕ್ರಮ ಮದ್ಯ ಸಾಗಣೆಯ ಪ್ರಕರಣ ಬೆಳಕಿಗೆ ಬಂದಿದೆ. ಗೋವಾದಿಂದ ಯಶವಂತಪುರದತ್ತ ಕಡೂರು ಮಾರ್ಗವಾಗಿ ಸಾಗುತ್ತಿದ್ದ ವಾಸ್ಕೋಡಿ ಗಾಮ ಎಕ್ಸ್ಪ್ರೆಸ್ ರೈಲಿನಲ್ಲಿ ಸುಮಾರು ₹10,000 ಮೌಲ್ಯದ 6 ಲೀಟರ್ ಅಕ್ರಮ ಮದ್ಯವನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಆಧಾರದಲ್ಲಿ ಅಬಕಾರಿ ಇಲಾಖೆಯ ನಿರೀಕ್ಷಿಕ ಎಲ್ ಸಿ ಸಂದೀಪ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಬೀರೂರಿನಲ್ಲಿ ರೈಲು ತಲುಪಿದಾಗಲೇ ಅಧಿಕಾರಿಗಳ ತಂಡ ತಕ್ಷಣ ಕಾರ್ಯಾಚರಣೆ ನಡೆಸಿ ಪ್ರಯಾಣಿಕನೊಬ್ಬನಿಂದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿತು. ಆರೋಪಿಯನ್ನು ಸ್ಥಳದಲ್ಲಿಯೇ ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿಯು ಮದ್ಯವನ್ನು ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದರೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಈ ಸಂಬಂಧ ಅಬಕಾರಿ ಇಲಾಖೆ ತನಿಖೆಯನ್ನು ಆರಂಭಿಸಿದ್ದು, ಆರೋಪಿಗೆ ವಿರುದ್ಧ ಪ್ರಕರಣ ದಾಖಲಾಗಿದೆ. ಅಕ್ರಮ ಮದ್ಯ ಸಾಗಣೆ ಪ್ರಕರಣಗಳಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಇಂತಹ ಕಾರ್ಯಾಚರಣೆಗಳನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಡೆಸಲಾಗುವುದು ಎಂದು ಅಬಕಾರಿ ಇಲಾಖೆ ತಿಳಿಸಿದೆ.
ಅಕ್ರಮ ಮದ್ಯ ಸಾಗಣೆ ನಿಯಂತ್ರಣಕ್ಕೆ ಅಬಕಾರಿ ಇಲಾಖೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಂದ ಸಹಕಾರವಿರಬೇಕೆಂಬ ಅಪೇಕ್ಷೆ ವ್ಯಕ್ತವಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣವೇ ಪತ್ತೆಹಚ್ಚಲು ಸಾರ್ವಜನಿಕರು ಮಾಹಿತಿ ನೀಡಬೇಕು ಎಂಬುದು ಅಧಿಕಾರಿಗಳ ಮನವಿ ಮಾಡಿದ್ದಾರೆ.